ಕಾರವಾರ: ಗೋವಾದಿಂದ ಬೆಂಗಳೂರಿನ ಹೊಸೂರಿಗೆ ದಾಖಲೆ ಇಲ್ಲದ ಒಂದು ಕೋಟಿ ರೂ. ಸಾಗಿಸಲಾಗುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಚೆಕ್ಪೋಸ್ಟ್ ಬಳಿ ತಡರಾತ್ರಿ ಪೊಲೀಸರು ದಾಳಿ ನಡೆಸಿ, ಒಂದು ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.ಖಾಸಗಿ ಬಸ್ನಲ್ಲಿ ಹಣ ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಕಲ್ಲೇಶ್ಕುಮಾರ ಮತ್ತು ಭಮ್ರುಕುಮಾರ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಪಾಸಣೆ ವೇಳೆ ಹಣ ಪತ್ತೆ
ಮಾಜಾಳಿ ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು, ಪ್ರಯಾಣಿಕರ ಬ್ಯಾಗ್ಗಳನ್ನು ಪರಿಶೀಲಿಸುವಾಗ ಕಲ್ಲೇಶ್ಕುಮಾರ ಎಂಬಾತನ ಬಳಿ ಇದ್ದ ಬ್ಯಾಗ್ನಲ್ಲಿ ಒಂದು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ.ಸದ್ಯ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದು, ಈ ಹಣ ಯಾರಿಗೆ ಸೇರಿದ್ದು, ಏಕೆ ಸಾಗಿಸಲಾಗುತ್ತಿತ್ತು ಎಂಬ ಕುರಿತು ತನಿಖೆ ಮುಂದುವರೆದಿದೆ. ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಶಪಡಿಸಿಕೊಂಡ ಹಣವು ಅಕ್ರಮ ವ್ಯವಹಾರಗಳಿಗೆ ಅಥವಾ ರಾಜಕೀಯ ನಂಟುಗಳಿಗೆ ಸಂಬಂಧಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.